
ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಮಹಿಳೆಯನ್ನು ಸಿಸಿಬಿ ಪೊಲೀಸರ ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಚಿಕ್ಕಮಗಳೂರು ಮೂಲದ ಮಹಿಳೆ ಸ್ಪೂರ್ತಿ ಎಂಬಾಕೆ ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರಿಂದ 45 ಲಕ್ಷ ರೂ ಪಡೆದಿದ್ದು, ಮತ್ತೆ ಒಂದು ಕೋಟಿ ಕೊಡಬೇಕೆಂದು ತನ್ನ ಸಹಚರರ ಜೊತೆ ಸೇರಿ ಬೆದರಿಕೆ ಹಾಕಿದ್ದಳು. ಮಹಿಳೆ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಮಾಡಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
















