
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬಟ್ವಾಳದ ಕೊಳ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಬಜರಂಗದಳ ಗೋ ರಕ್ಷಾ ಪ್ರಮುಖ್ ಆಗಿರುವ ರವಿ ಸಂಜಯ್ ಪೂಜಾರಿ ಅವರನ್ನು ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪ

ಅಬ್ದುರ್ ರಹಿಮಾನ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಹಾಯ ಮಾಡಿದ ಹಿನ್ನಲೆ ರವಿ ಸಂಜಯ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ನಿನ್ನೆ ಮಧ್ಯಾಹ್ನದ ಸುಮಾರಿಗೆ ಬಾಡಿಗೆ ಇನ್ನೊವಾ ಕಾರೊಂದರಲ್ಲಿ ಬಂದ ಮಂಗಳೂರಿನ ವಿಶೇಷ ಪೊಲೀಸರ ತಂಡ, ಶೃಂಗೇರಿಯ ಗಾಂಧಿ ಮೈದಾನದಲ್ಲಿ ಅಂಗಡಿಯಲ್ಲಿ ವ್ಯಾಪಾರದಲ್ಲಿ ತೊಡಗಿದ್ದ ರವಿ ಸಂಜಯ್ ನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರವಿ ಸಂಜಯ್ ಪೂಜಾರಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಏನಿದು ಪ್ರಕರಣ?
ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಕೊಳ್ತಮಜಲು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ಶೃಂಗೇರಿಯ ಬಜರಂಗದಳ ಮುಖಂಡನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಪತ್ತೆಗೆ 5 ವಿಶೇಷ ತಂಡ
ರಹಿಮಾನ್ ಹತ್ಯೆ ಪ್ರಕರಣ ಸಂಬಂಧ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಜನರ ವಿರುದ್ಧ FIR ದಾಖಲಾಗಿದೆ. ನಿಸಾರ್ ಎಂಬುವವರು ನೀಡಿದ ದೂರಿನ ಅನ್ವಯ 15 ಜನರ ವಿರುದ್ಧ FIR ದಾಖಲಾಗಿತ್ತು. ಪ್ರಕರಣ ಸಂಬಂಧ ದೀಪಕ್, ಸುಮಿತ್, ಅಭಿನ್ ರೈ, ತೇಜಾಕ್ಷಿ ಸೇರಿ 5 ಜನ ಆರೋಪಿಗಳನ್ನು ಬಂಧಿಸಲಾಗಿತ್ತು. ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್ ತಂಡ ರಚನೆ ಮಾಡಲಾಗಿದ್ದು, ಡಿವೈಎಸ್ಪಿ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.













