ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತರೀಕೆರೆ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ತರೀಕೆರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಯುವಕರನ್ನು ಸಂಘಟಿಸಿ, ಅವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಸ್ಥಾಪಿಸಿದರು ಎಂದು ಸ್ಮರಿಸಿದರು. ಇಂದು ಆ ಸಂಸ್ಥಾಪನಾ ದಿನವನ್ನು ಜನಸೇವೆಯ ಮೂಲಕ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ, “ಇದು ಕೇವಲ ಒಂದು ಸಂಘಟನೆಯ ಸಂಸ್ಥಾಪನಾ ದಿನಾಚರಣೆ ಮಾತ್ರವಲ್ಲ; ದೇಶದ ಯುವಜನತೆಯ ಧ್ವನಿಯಾಗಿ, ಪ್ರಜಾಪ್ರಭುತ್ವದ ರಕ್ಷಣೆಗೆ, ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ದೇಶದ ಅಭಿವೃದ್ಧಿಗಾಗಿ ಹೋರಾಡುತ್ತಿರುವ ಯುವ ಶಕ್ತಿಯ ದಿನವಾಗಿದೆ” ಎಂದು ತಿಳಿಸಿದರು.


ಯುವ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಹಣ್ಣು ಹಂಪಲು ವಿತರಿಸಿ, ಸಮಾಜಮುಖಿ ಸೇವೆಯ ಮೂಲಕ ಸಂಸ್ಥಾಪನಾ ದಿನಾಚರಣೆಗೆ ವಿಶೇಷ ಮೆರುಗು ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮನೋಜ್ ಕೃಷ್ಣಮೂರ್ತಿ, ತರೀಕೆರೆ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಧವನ್ ರಾಜ್ ಎಂ.ವೈ., ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್, ಯುವ ಕಾಂಗ್ರೆಸ್ ಮುಖಂಡರಾದ ಬಾಲಾಜಿ, ಚಂದ್ರನಾಯ್ಕ, ಪದಾಧಿಕಾರಿಗಳಾದ ಶಾಮೀರ್, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ, ಮಿಥುನ್, ಪುನೀತ್, ಚಂದನ್, ವಿಜಯ್ (ಎನ್.ಆರ್.ಪುರ), ಎನ್ಎಸ್ಯುಐ ಮುಖಂಡ ರವಿ ಸೇರಿದಂತೆ ಯುವ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. (ವರದಿ: ಶಶಿ ಬೆತ್ತದಕೊಳಲು)














