ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ನೂತನ ಜಿಲ್ಲಾಧಿಕಾರಿ ನಿನ್ನೆ ಶೃಂಗೇರಿ ತಾಲ್ಲೂಕಿನ ವಿವಿಧ ಸೂಕ್ಷ್ಮ ಹಾಗೂ ದೂರದ ಮತಗಟ್ಟೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು, ಕೇರೆಕಟ್ಟೆ, ನೆಮ್ಮಾರ್ ಹಾಸ್ಟೆಲ್ ಸೇರಿದಂತೆ ದೂರದ ಮತಗಟ್ಟೆಗಳ ಮೂಲಸೌಕರ್ಯ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ವಿದ್ಯುತ್ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದೇ ವೇಳೆ ಮಳೆಗಾಲದ ಹಿನ್ನೆಲೆಯಲ್ಲಿ ಭೂಕುಸಿತ ಸಂಭವಿಸಿರುವ ಪ್ರದೇಶಗಳು ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಿದರು. ಮಳೆಗಾಲದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ತುರ್ತು ಪರಿಹಾರ ಕಾರ್ಯಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅವರು, ರಸ್ತೆ, ಸೇತುವೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪರಿಶೀಲನಾ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.













