ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ಕುಮಾರ್ ದಯ್ಯಾ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಅಪರಿಚಿತ ಕಿಡಿಗೇಡಿಗಳು ಎಸ್ಪಿ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಈ ಖಾತೆಯನ್ನು ತೆರೆಯಲಾಗಿದೆ. ಈ ಖಾತೆಯ ಮೂಲಕ ಚಿಕ್ಕಮಗಳೂರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ವಿಶೇಷವಾಗಿ, ಚಿಕ್ಕಮಗಳೂರು ಜಿಲ್ಲೆಗೆ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯ್ಯಾ ಅವರು ವರ್ಗಾವಣೆಯಾದ ನಂತರವೇ ಈ ನಕಲಿ ಖಾತೆ ಸೃಷ್ಟಿಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ.

ಈ ಖಾತೆಯ ಮೂಲಕ ತಪ್ಪು ಮಾಹಿತಿ ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ. ಯಾವುದೇ ಸಂಶಯಾಸ್ಪದ ಮಾಹಿತಿ ಕಂಡುಬಂದರೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಘಟನೆಗೆ ಸಂಬಂಧಿಸಿದಂತೆ ಎಸ್ಪಿ ಜಿತೇಂದ್ರ ಕುಮಾರ್ ದಯ್ಯಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ನಕಲಿ ಖಾತೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿರುವ ಪೊಲೀಸರು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ.













