ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಣಕಲ್ ಪಟ್ಟಣದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ವಿರುದ್ಧ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಣಕಲ್ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ದಿನಸಿ ಅಂಗಡಿಯಲ್ಲಿ ನಯಾಜ್ ಅಹಮ್ಮದ್ (58) ಎಂಬಾತ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಲಭಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಬಕೆಟ್ನಲ್ಲಿ ಕವರ್ಗಳಲ್ಲಿ ಪ್ಯಾಕ್ ಮಾಡಿಟ್ಟಿದ್ದ ಸುಮಾರು 11 ಕೆಜಿ ಗೋಮಾಂಸ ಪತ್ತೆಯಾಗಿದೆ.

ವಿಚಾರಣೆ ವೇಳೆ, ಸುತ್ತಮುತ್ತಲಿನ ಎಸ್ಟೇಟ್ಗಳಲ್ಲಿ ಕೆಲಸ ಮಾಡುವ ಅಸ್ಸಾಂ ಮೂಲದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲು ಚಿಕ್ಕಮಗಳೂರಿನ ಇಟ್ಬಾಲ್ ಎಂಬವರಿಂದ ಕೆಜಿಗೆ ₹250ರಂತೆ ಖರೀದಿ ಮಾಡಿ ತಂದು, ಇಲ್ಲಿ ಕೆಜಿಗೆ ₹300ರಂತೆ ಮಾರಾಟ ಮಾಡುತ್ತಿದ್ದುದಾಗಿ ಆರೋಪಿ ತಿಳಿಸಿದ್ದಾರೆ.

ಸ್ಥಳದಲ್ಲಿದ್ದ 11 ಕೆಜಿ ಗೋಮಾಂಸ ಹಾಗೂ ಮಾರಾಟದಿಂದ ಬಂದಿದ್ದ ₹600 ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಯಾಜ್ ಅಹಮ್ಮದ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.













