

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಕಲ್ಕಟ್ಟೆಯಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ 36ನೇ ವರ್ಷದ ಶ್ರೀ ವಿದ್ಯಾಗಣಪತಿ ಮಹೋತ್ಸವವನ್ನು ಸೆಪ್ಟೆಂಬರ್ 14ರಿಂದ 16ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.
ಸೆಪ್ಟೆಂಬರ್ 14ರಂದು ಬೆಳಗ್ಗೆ 9.30ಕ್ಕೆ ಶ್ರೀ ವಿದ್ಯಾಗಣಪತಿ ಪ್ರತಿಷ್ಠಾಪನೆ, ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 2.30ರಿಂದ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಗೂ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಸೆಪ್ಟೆಂಬರ್ 15ರಂದು ಬೆಳಗ್ಗೆ 9.30ಕ್ಕೆ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿವೆ.
ಸಂಜೆ 5 ಗಂಟೆಯಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 7 ಗಂಟೆಯಿಂದ ಟೀಮ್ ಗಣೇಶ್ ಡ್ಯಾನ್ಸಿಂಗ್ ಸ್ಟಾರ್ಸ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ವಿಶೇಷ ನೃತ್ಯ ಪ್ರದರ್ಶನ ನಡೆಯಲಿದೆ. ಇದಾದ ಬಳಿಕ ಮಂಗಳೂರಿನಿಂದ ಆಗಮಿಸುವ ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.

ಸೆಪ್ಟೆಂಬರ್ 16ರಂದು ಬೆಳಗ್ಗೆ 9.30ಕ್ಕೆ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಮಕ್ಕಳಿಗಾಗಿ ಛದ್ಮವೇಷ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಜೆ 4.30ರಿಂದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಸಂಜೆ 6 ಗಂಟೆಗೆ ಪ್ರಧಾನ ವಿದಾಯದ ದಿನದಂದು ರಾಜಬೀದಿಯಲ್ಲಿ ವೈಭವಪೂರ್ಣ ಮೆರವಣಿಗೆಯೊಂದಿಗೆ ಶ್ರೀ ವಿದ್ಯಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೂ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಮನವಿ ಮಾಡಿದೆ.
ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಪೂಜೆ, ಧಾರ್ಮಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಕಲ್ಕಟ್ಟೆ, ಶೃಂಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಕಲ್ಕಟ್ಟೆ–ಶೃಂಗೇರಿ ವತಿಯಿಂದ ಮೂರು ದಿನಗಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.















