ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಐವತ್ತು ವರ್ಷಗಳಿಂದ ಕಾರ್ಯನಿರ್ವಹಿಸಿದ್ದ ಶ್ರೀ ಶಾರದಾ ಧನ್ವಂತರಿ ಆಸ್ಪತ್ರೆ ಪ್ರಸ್ತುತ ಉಭಯ ಶ್ರೀಗಳ ಅನುಗ್ರಹದಿಂದ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಲ್ ಆಸ್ಪತ್ರೆಯಾಗಿ ಪ್ರಾರಂಭಗೊಂಡಿದ್ದು, ತುರ್ತು ಚಿಕಿತ್ಸಾ ಘಟಕ ಹಾಗೂ ತಜ್ಞವೈದ್ಯರ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಲಕ್ಷ್ಮೀನಾರಾಯಣ್ ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್ನ್ಯೂಸ್: ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಹಾಲಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಗಳವಾರ ಮೆಣಸೆಯಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸರ್ವರಿಗೂ ಆರೋಗ್ಯವೇ ಪ್ರಮುಖ ಸಂಪತ್ತು. ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಆಸ್ಪತ್ರೆಯ ಒಂದು ಘಟಕವಾದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿ ಮೊಬೈಲ್ ಆಸ್ಪತ್ರೆಯು ಯತಿವರ್ಯರ ಆಶಯದಂತೆ ಕಾರ್ಯನಿರ್ವಹಿಸುತ್ತಿದೆ.


ಕಮ್ಮರಡಿ, ರಾಮಕೃಷ್ಣಪುರ, ಬಾಳೆಹೊನ್ನೂರು, ಕೊಗ್ರೆ ಮುಂತಾದ ಪ್ರದೇಶಗಳಲ್ಲಿ ಸಂಚರಿಸಿ ಸುಮಾರು ಹದಿನೈದು ಗ್ರಾಮೀಣ ಪ್ರದೇಶಗಳ ಜನರ ಆರೋಗ್ಯ ತಪಾಸಣೆ ಮಾಡುತ್ತಿದೆ. ಐವರು ವೈದ್ಯರು ಹಾಗೂ ತಂತ್ರಜ್ಞರ ತಂಡ ಕೆಲಸ ಮಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಮಲ್ಟಿ ಸ್ಪೆಷಲ್ ಆಸ್ಪತ್ರೆಯಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಶೃಂಗೇರಿ ಶಾರದಾ ಪೀಠವು ಬೆಂಗಳೂರಿನಲ್ಲಿ ರಂಗಾದೊರೈ ಹಾಗೂ ಶಂಕರ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸಿ ರಿಯಾಯತಿ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕೆನರಾ ಬ್ಯಾಂಕ್ನಿಂದ 30 ದಿನದ ಉಚಿತ ಹೊಲಿಗೆ ತರಬೇತಿ; ಡಿಟೇಲ್ಸ್ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಾಲಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಾರನಕೂಡಿಗೆ ನಟರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ಬಡವರಿಗೆ ಮೊಬೈಲ್ ಆಸ್ಪತ್ರೆ ಉತ್ತಮ ಚಿಕಿತ್ಸೆ ನೀಡುತ್ತಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾದಾಗ ಚಿಕಿತ್ಸೆ ನೀಡಲು ಅವರ ಮನೆ ಸಮೀಪ ಬರುವ ಮೊಬೈಲ್ ಆಸ್ಪತ್ರೆ ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಿತಗೊಂಡಿದೆ. ಇದರ ಸದುಪಯೋಗವನ್ನು ಸರ್ವರೂ ಪಡೆಯಬೇಕು ಎಂದು ಮನವಿ ಮಾಡಿದರು.

















