ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗುಂಡಿಗಳ ಸಮಸ್ಯೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಂತೆ ಮಾರುಕಟ್ಟೆ ಸಮೀಪ ರಸ್ತೆ ಮಧ್ಯೆ ಉಂಟಾಗಿರುವ ಭಾರೀ ಗುಂಡಿಯನ್ನು ದುರಸ್ತಿ ಮಾಡದೇ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ, ಸ್ಥಳೀಯರು ಗುಂಡಿಯಲ್ಲೇ ಹೂವಿನ ಪಾಟ್ ಇಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.


ಶೃಂಗೇರಿ ಪಟ್ಟಣದ ಪ್ರಮುಖ ರಸ್ತೆಗಳು ಸೇರಿದಂತೆ ಹಲವು ಬಡಾವಣೆಗಳ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಪರದಾಡುವಂತಾಗಿದೆ. ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಂತು ಅಪಾಯ ಮತ್ತಷ್ಟು ಹೆಚ್ಚಾಗುತ್ತಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಯಾವುದೇ ಶಾಶ್ವತ ಪರಿಹಾರ ಕಲ್ಪಿಸದಿರುವುದರಿಂದ ಸಾರ್ವಜನಿಕರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.


ಈ ಘಟನೆಗೆ ಸಂಬಂಧಿಸಿದ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪಟ್ಟಣ ಪಂಚಾಯತ್ನ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. “ತೆರಿಗೆ ಕಟ್ಟುವ ಜನರಿಗೆ ಮೂಲಭೂತ ಸೌಲಭ್ಯಗಳನ್ನೂ ಒದಗಿಸಲು ಸಾಧ್ಯವಾಗದ ಆಡಳಿತಕ್ಕೆ ಇದು ನಾಚಿಕೆಯ ಸಂಗತಿ” ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.














