ಮಹಿಳೆಯನ್ನ ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ದೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿದ್ದಾರೆ.

ವಿಶಾಲಾಕ್ಷಿ ಅವರ ಪತಿ 15 ವರ್ಷದ ಹಿಂದೆ ನಿಧನರಾಗಿದ್ದು. ಹಾಗಾಗಿ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಏಪ್ರಿಲ್ 21ರ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿತು. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು. ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದರು. ಬಾಗಿಲು ತೆರೆಯದ ವಿಶಾಲಾಕ್ಷಿ ಅವರು ಕಿಟಕಿಯ ಮೂಲಕವೆ ನಲ್ಲಿಯಲ್ಲಿದ್ದ ನೀರು ಕುಡಿಯಿರಿ ಎಂದು ತಿಳಿಸಿದ್ದಾರೆ.

ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷದ ಬಳಿಕ ಅನುಮಾನಗೊಂಡ ವೃದ್ದೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಿದರು. ಆಗ ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಒಳ ನುಗ್ಗಿದ ದರೋಡೆಕೋರರು ವಿಶಾಲಾಕ್ಷಿ ಅವರ ಬಾಯಿಯನ್ನು ಒತ್ತಿ ಹಿಡಿದು ಬೆದರಿಸಿದ್ದರು. ಬಳಿಕ ಅವರ ಕೈಗಳನ್ನು ಸೀರೆಯಿಂದ ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದರು. ಈ ವೇಳೆ ವೃದ್ಧೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದರೋಡೆಕೋರರು ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ. ವಿಶಾಲಾಕ್ಷಿ ಅವರ ಮೈಮೇಲಿದ್ದ ಚಿನ್ನದ ಸರ, ಎರಡು ಕೈಬಳೆ, ಕಿವಿ ಓಲೆ ಸೇರಿದಂತೆ ಒಟ್ಟು 146 ಗ್ರಾಂ ತೂಕದ ವಿವಿಧ ಚಿನ್ನಾಭರಣ ಕಸಿದುಕೊಂಡಿದ್ದಾರೆ. ಇವುಗಳ ಮೌಲ್ಯ ಅಂದಾಜು 17.52 ಲಕ್ಷ ಎನ್ನಲಾಗಿದೆ. ಇದಲ್ಲದೆ ಬೀರುವಿನಲ್ಲಿದ್ದ 50,000 ನಗದು ಹಾಗೂ ಟೇಬಲ್ ಮೇಲಿದ್ದ ಪರ್ಸ್‌ನಲ್ಲಿದ್ದ 1,000 ಹಣ ಮತ್ತು ಒಂದು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ. ಬಳಿಕ ಹಿತ್ತಲ ಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.

ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.